ಮಾಂಬಾಡಿ, ಕಪ್ಪೆಕೆರೆ, ಜಬ್ಬಾರ್, ಉಳಿತ್ತಾಯರಿಗೆ ಯಕ್ಷಮಂಗಳ 2025-26 ಪುರಸ್ಕಾರ

ಕಪ್ಪೆಕೆರೆ ಸುಬ್ರಾಯ ಭಾಗವತರು, ಮಾಂಬಾಡಿ ಸುಬ್ರಹ್ಮಣ್ಯ ಭಟ್, ಜಬ್ಬಾರ್ ಸಮೊ ಸಂಪಾಜೆ ಅವರಿಗೆ ಯಕ್ಷಮಂಗಳ ಪ್ರಶಸ್ತಿ, ಕೃಷ್ಣಪ್ರಕಾಶ ಉಳಿತ್ತಾಯರ 'ಬಲಿಪ ಮಾರ್ಗ' ಹಾಗೂ 'ಅಗರಿ ಮಾರ್ಗ' ಗ್ರಂಥಕ್ಕೆ ಕೃತಿ ಪ್ರಶಸ್ತಿ
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ‌ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರು ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಹಿಮ್ಮೇಳವಾದಕ ಕೃಷ್ಣಪ್ರಕಾಶ್ ಉಳಿತ್ತಾಯ ಅವರ 'ಬಲಿಪ ಮಾರ್ಗ ಹಾಗೂ ಅಗರಿ ಮಾರ್ಗ' ಕೃತಿಯು ಆಯ್ಕೆಯಾಗಿದೆ.
ಯಕ್ಷಮಂಗಳ ಪ್ರಶಸ್ತಿಯು 25,000 ರೂ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಸನ್ಮಾನಗಳನ್ನೊಳಗೊಂಡಿದೆ. ಯಕ್ಷಮಂಗಳ ಕೃತಿ ಪ್ರಶಸ್ತಿಯು 10,000 ರೂ ನಗದು, ಪ್ರಶಸ್ತಿ, ಸ್ಮರಣಿಕೆಗಳನ್ನೊಳಗೊಂಡಿದೆ.

ಕಪ್ಪೆಕೆರೆ ಸುಬ್ರಾಯ ಭಾಗವತ: 
ಕಪ್ಪೆಕೆರೆ ಸುಬ್ರಾಯ ಭಾಗವತರು ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ತಲೆಮಾರಿನ ಅಗ್ರಮಾನ್ಯ ಕಲಾವಿದರಾಗಿದ್ದಾರೆ. ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹಡಿನಬಾಳ ಎಂಬಲ್ಲಿ 1947ರಲ್ಲಿ ಈಶ್ವರ ಹೆಗಡೆ- ಗೋಪಿ ಹೆಗಡೆ ದಂಪತಿಯ ಸುಪುತ್ರರಾಗಿ ಜನಿಸಿದ ಅವರು ಹದಿನಾರರ ಹರೆಯದಲ್ಲೇ ಯಕ್ಷಗಾನ ರಂಗಕ್ಕೆ ಪಾದಾರ್ಪಣೆ ಮಾಡಿದರು. ಸರ್ವಾಂಗೀಣ ಕಲಾವಿದರಾಗಿ, ನಾಡಿನ ಓರ್ವ ಶ್ರೇಷ್ಠ ಭಾಗವತರಾಗಿ ಗುರುತಿಸಿದ್ದಾರೆ. ಗುಂಡಬಾಳ, ಇಡಗುಂಜಿ, ಅಮೃತೇಶ್ವರಿ, ಕಮಲಶಿಲೆ, ಸಾಲಿಗ್ರಾಮ, ಬಚ್ಚಗಾರು, ಪಂಚಲಿಂಗ ಮೇಳಗಳಲ್ಲಿ ಐದು ದಶಕಗಳಿಗೂ ಹೆಚ್ಚು ಕಾಲ ಸೇವೆಗೈದ ಹಿರಿಯ ಕಲಾವಿದರಾಗಿದ್ದಾರೆ.

ಮಾಂಬಾಡಿ ಸುಬ್ರಹ್ಮಣ್ಯ ಭಟ್:
ಯಕ್ಷಗಾನ ಕ್ಷೇತ್ರದಲ್ಲಿ ಹಿಮ್ಮೇಳ ವಾದಕರಾಗಿ ಮೇಳದ ತಿರುಗಾಟದ ಜೊತೆಗೆ ಯಕ್ಷಗಾನ ಗುರುಗಳಾಗಿ ಗುರುಪರಂಪರೆಯನ್ನು ಮೆರೆಸಿದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರು ಯಕ್ಷಗಾನ ರಂಗದ ಹಿರಿಯ ಸಾಧಕರಾಗಿದ್ದಾರೆ. ಮಾಂಬಾಡಿ ನಾರಾಯಣ ಭಾಗವತರ ಸುಪುತ್ರರಾಗಿ ತಂದೆಯ ಮಾರ್ಗದರ್ಶನದಲ್ಲಿ ಮುಂದುವರಿದು ಕಟೀಲು, ಕರ್ನಾಟಕ, ಕದ್ರಿ ಮೊದಲಾದ ಮೇಳಗಳಲ್ಲಿ ತಿರುಗಾಟ ಮಾಡಿದ್ದಾರೆ. ಕಾಸರಗೋಡು, ದ.ಕ.ಜಿಲ್ಲೆಯ ನಾನಾ ಕಡೆ ಯಕ್ಷಗಾನದ ಹಿಮ್ಮೇಳ ತರಗತಿಗಳನ್ನು ನಡೆಸಿ ನೂರಾರು ಶಿಷ್ಯಂದಿರಿಗೆ ಹಿಮ್ಮೇಳ ಶಿಕ್ಷಣ ನೀಡಿದ್ದಾರೆ. ಇವರಲ್ಲಿ ಕಲಿತ ಅನೇಕ ಶಿಷ್ಯರು ವೃತ್ತಿಪರ ಕಲಾವಿದರಾಗಿ, ಹವ್ಯಾಸಿ ಕಲಾವಿದರಾಗಿ ಸೇವೆಗೈಯ್ಯುತ್ತಿದ್ದಾರೆ.

ಜಬ್ಬಾರ್ ಸಮೊ: 
ಯಕ್ಷಗಾನ ರಂಗದ ತಾಳಮದ್ದಳೆಯ ಹಿರಿಯ ಅರ್ಥಧಾರಿಯಾಗಿರುವ ಜಬ್ಬಾರ್ ಸಮೊ ಅವರು ಸಂಪಾಜೆಯ ಮೊಯ್ದಿನ್ ಕುಂಞಿ ಹಾಗೂ ಬೀಪಾತುಮ್ಮ ದಂಪತಿಯ ಪುತ್ರರಾಗಿ 1963ರಲ್ಲಿ ಜನಿಸಿದರು. ಎಳವೆಯಲ್ಲಿಯೇ ಯಕ್ಷಗಾನದ‌ ಆಸಕ್ತಿಯನ್ನು ಬೆಳೆಸಿಕೊಂಡಿದ್ದ ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದರು. ವಳಕುಂಜ ಕುಮಾರ ಸುಬ್ರಹ್ಮಣ್ಯ ಭಟ್ ಅವರ ಮೊದಲ ಗುರುವಾಗಿದ್ದು, ಆರಂಭದಲ್ಲಿ ದ್ರೋಣ, ಜಾಬಾಲಿ, ಈಶ್ವರ, ಸಂಜಯ, ಅಕ್ರೂರ, ಬ್ರಹ್ಮ, ಕಂಸ ಮೊದಲಾದ‌ ಪಾತ್ರಗಳನ್ನು ಮಾಡಿದ್ದರು. 1990ರ ಬಳಿಕ  ತಾಳಮದ್ದಳೆಯಲ್ಲಿ ಭಾಗವಹಿಸಲು ಆರಂಭಿಸಿದ ಅವರಿಗೆ ವಾಲಿ, ಮಾಗಧ, ಕರ್ಣ, ಅರ್ಜುನ, ಶಲ್ಯ, ಸುಗ್ರೀವ, ಭೀಷ್ಮ, ಕೌರವ, ಶುಂಭ, ರಕ್ತಬೀಜ, ಧರ್ಮಾಂಗದ, ಭರತ, ಶತ್ರುಘ್ನ, ಹನುಮಂತ, ವೀರಮಣಿ, ಈಶ್ವರ, ಬಲರಾಮ, ರುಕ್ಮ, ಭೀಷ್ಮ, ಜಾಂಬವಂತ, ಶತ್ರುಪ್ರಸೂದನ, ಬಲಿ, ಶುಕ್ರಾಚಾರ್ಯ ಮುಂತಾದ ಪಾತ್ರಗಳು ಖ್ಯಾತಿಯನ್ನು ತಂದಿದೆ.

ಅವರ ಪಾಂಡಿತ್ಯಪೂರ್ಣ ಸಂಭಾಷಣೆ, ಆಕರ್ಷಕ ಪದಪ್ರಯೋಗ ಮತ್ತು ಭಾವಪೂರ್ಣ ನಟನೆಯು ಅವರಿಗೆ ಎಲ್ಲಾ ಸಮುದಾಯಗಳಿಂದ ಅಪಾರ ಅಭಿಮಾನಿಗಳನ್ನು ಗಳಿಸಿಕೊಟ್ಟಿದೆ.


'ಬಲಿಪ ಮಾರ್ಗ',‌ 'ಅಗರಿ ಮಾರ್ಗ'ಕ್ಕೆ ಯಕ್ಷಮಂಗಳ ಕೃತಿ ಪ್ರಶಸ್ತಿ
ಕೃಷ್ಣ ಪ್ರಕಾಶ ಉಳಿತ್ತಾಯರು ಖ್ಯಾತ ಹಿಮ್ಮೇಳ ಕಲಾವಿದರಾಗಿದ್ದು 'ಬಲಿಪ ಮಾರ್ಗ' ಹಾಗೂ 'ಅಗರಿ ಮಾರ್ಗ' ಕೃತಿಗಳ ಲೇಖಕರಾಗಿದ್ದಾರೆ. ಬಲಿಪ ಮಾರ್ಗ ಕೃತಿಯು ಯಕ್ಷಗಾನ ರಂಗದ ಹಿರಿಯ ಕಲಾವಿದರಾದ ಹಿರಿಯ ಅಜ್ಜ ಬಲಿಪ ನಾರಾಯಣ ಭಾಗವತರು ಹಾಗೂ ಕಿರಿಯ ಬಲಿಪ ನಾರಾಯಣ ಭಾಗವತರ ಬದುಕು, ಗಾನಮಾರ್ಗ ಇವುಗಳನ್ನು ಸುಂದರವಾಗಿ, ಅರ್ಥಪೂರ್ಣವಾಗಿ ನಿರೂಪಿಸುವ ಕೃತಿಯಾಗಿದೆ.

'ಅಗರಿ ಮಾರ್ಗ’ ಕೃತಿಯು ತೆಂಕುತಿಟ್ಟಿನ ಯಕ್ಷಗಾನ ಪ್ರದರ್ಶನ ಕಲೆಯಲ್ಲಿ ಯಕ್ಷಬ್ರಹ್ಮ ಎಂದು ಪ್ರಸಿದ್ಧರಾದ ಅಗರಿ ಶ್ರೀನಿವಾಸ ಭಾಗವತರ ಬದುಕು, ಹಾಡುವ ಕ್ರಮ, ರಚನೆ, ಸಾಹಿತ್ಯ ವೈಶಿಷ್ಟ್ಯವನ್ನು ತೆರೆದಿಡುವ ಮಹತ್ವದ ಕೃತಿಯಾಗಿದೆ.

ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರ ನೇತೃತ್ವದಲ್ಲಿ ಪ್ರೊ.ಪಾದೆಕಲ್ಲು ವಿಷ್ಣುಭಟ್, ಯಕ್ಷಗಾನ ಸಂಘಟಕ ಮುರಲೀ ಕಡೇಕಾರ್ ಹಾಗೂ ಕೇಂದ್ರದ ನಿರ್ದೇಶಕರಾದ‌ ಡಾ.ಧನಂಜಯ ಕುಂಬ್ಳೆ ಅವರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಸಭೆಯಲ್ಲಿ ಈ ಹೆಸರನ್ನು ಸರ್ವಾನುಮತದಿಂದ ಶಿಫಾರಸ್ಸು ಮಾಡಲಾಯಿತು.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ‌ಎಲ್.ಧರ್ಮ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಯಕ್ಷಮಂಗಳ ಪ್ರಶಸ್ತಿ  ಮತ್ತು ಕೃತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳೂರು ವಿವಿ ಕುಲಸಚಿವರಾದ ಪ್ರೊ.ಗಣೇಶ್ ಸಂಜೀವ್ ಹಾಗೂ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಧನಂಜಯ ಕುಂಬ್ಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಅಭಿಪ್ರಾಯ ತಿಳಿಸಿ

ನವೀನ ಹಳೆಯದು